IFS Result 2026: ಸಾಧನೆಯ ಶಿಖರ ತಲುಪಿದ ರೈತನ ಮಗ: IFS ಫಲಿತಾಂಶದಲ್ಲಿ ದೇಶದ ಮೊದಲ ಸ್ಥಾನ
IFS Result 2026: ಕರ್ನಾಟಕದ ಅಥಣಿಯ ರೈತನ ಮಗ ಭಾರತೀಯ ಅರಣ್ಯ ಸೇವೆ (IFS) ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ರ್ಯಾಂಕ್ ಪಡೆದು ರಾಜ್ಯದ ಕೀರ್ತಿಯನ್ನು ಹೆಚ್ಚಿಸಿದ್ದಾನೆ. ಗ್ರಾಮೀಣ ಹಿನ್ನೆಲೆಯಿಂದ ರಾಷ್ಟ್ರಮಟ್ಟದ ಸಾಧನೆ ಮಾಡಿದ ಯುವಕನ ಯಶೋಗಾಥೆ ಇಲ್ಲಿದೆ.
ಕೇಂದ್ರ ಲೋಕಸೇವಾ ಆಯೋಗ (UPSC) ಭಾರತೀಯ ಅರಣ್ಯ ಸೇವೆ (IFS) ಪರೀಕ್ಷೆಯ ಫಲಿತಾಂಶವನ್ನು ಶುಕ್ರವಾರ ಪ್ರಕಟಿಸಿದ್ದು, ಕನ್ನಡಿಗ ಯುವಕನೊಬ್ಬ ದೇಶದ ಮಟ್ಟದಲ್ಲಿ ಪ್ರಥಮ ರ್ಯಾಂಕ್ ಪಡೆದು ರಾಜ್ಯದ ಕೀರ್ತಿಯನ್ನು ಹೆಚ್ಚಿಸಿದ್ದಾನೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸವದಿ ಗ್ರಾಮದ ಬಸವರಾಜ್ ದರೇಪ್ಪ ಕೆಂಪವಾಡ ಅವರು ಅಖಿಲ ಭಾರತ ಮಟ್ಟದಲ್ಲಿ ಮೊದಲ ರ್ಯಾಂಕ್ ಗಳಿಸಿ ಅಪೂರ್ವ ಸಾಧನೆ ಮೆರೆದಿದ್ದಾರೆ. ಸಾಮಾನ್ಯ ರೈತನ ಮಗನಾದ ಬಸವರಾಜ್ ಅವರ ಈ ಸಾಧನೆಗೆ ರಾಜ್ಯದಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.
ಕಠಿಣ ಪರಿಶ್ರಮ ಮತ್ತು ನಿರಂತರ ಅಧ್ಯಯನದ ಫಲವಾಗಿ, ತಮ್ಮ ಎರಡನೇ ಪ್ರಯತ್ನದಲ್ಲೇ ಬಸವರಾಜ್ ಅವರು ದೇಶದ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಅವರ ಸಾಧನೆಯಿಂದ ಕುಟುಂಬಸ್ಥರು ಮಾತ್ರವಲ್ಲದೆ, ಸಂಪೂರ್ಣ ಸವದಿ ಗ್ರಾಮವೇ ಸಂಭ್ರಮಾಚರಣೆಯಲ್ಲಿ ತೊಡಗಿದೆ.
ಬಸವರಾಜ್ ಅವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸ್ವಗ್ರಾಮ ಸವದಿಯಲ್ಲೇ ಪೂರ್ಣಗೊಳಿಸಿದ್ದರು. ನಂತರ ಅಥಣಿ ಪಟ್ಟಣದಲ್ಲಿ ಪ್ರೌಢ ಮತ್ತು ಪದವಿ ಪೂರ್ವ ಶಿಕ್ಷಣ ಪಡೆದ ಅವರು, ಶಿರಸಿಯಲ್ಲಿ ಪದವಿ ವ್ಯಾಸಂಗ ಮುಗಿಸಿದರು. ಬಳಿಕ ಬೆಂಗಳೂರಿನಲ್ಲಿ ನೆಲೆಸಿ UPSC ಪರೀಕ್ಷೆಗೆ ಶ್ರದ್ಧೆಯಿಂದ ಸಿದ್ಧತೆ ನಡೆಸಿ ಇಂದು ದೇಶದ ಅಗ್ರ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.



